ಮಂಗಳೂರು: ನಗರದ ರಥಬೀದಿಯಲ್ಲಿ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ವೀರ ವೆಂಕಟೇಶ ದೇವರ ಬ್ರಹ್ಮರಥೋತ್ಸವ ಸಂಭ್ರಮದ ‘ಕೊಡಿಯಾಲ್ ತೇರು’ ಬುಧವಾರ ಸಂಜೆ ಜರಗಿತು.
ಸಂಜೆ 5.30ರ ವೇಳೆಗೆ ಚಿನ್ನದ ಪಲ್ಲಕ್ಕಿಯೇರಿ ದೇಗುಲದಿಂದ ರಥದೆಡೆಗೆ ವೀರ ವೆಂಕಟೇಶ ದೇವರ ಆಗಮನದ ಬಳಿಕ ಸಾಂಪ್ರದಾಯಿಕ ರಥ ಪ್ರದಕ್ಷಿಣೆ ನಡೆಯಿತು. ಸಹಸ್ರಾರು ಭಜಕರ ಹರ್ಷೋದ್ಗಾರದ ನಡುವೆ ಸಂಜೆ 6.05ರ ವೇಳೆಗೆ ಶ್ರೀದೇವರ ರಥಾರೋಹಣ ನಡೆಯಿತು. ರಥಾರೂಢ ವೀರ ವೆಂಕಟೇಶ ದೇವರಿಗೆ ಮಹಾ ಮಂಗಳಾರತಿ ಬೆಳಗಿ ಪ್ರಾರ್ಥನೆ ಸಲ್ಲಿಸಿದರು.
ಸಮಾಜದ ಪರವಾಗಿ ಶ್ರೀ ದೇವಳದ ಆಡಳಿತ ಮೊಕ್ತೇಸರ ಎಂ. ಪದ್ಮನಾಭ ಪೈ ಸಹಿತ ಮೊಕ್ತೇಸರರು ಮಹಾಪ್ರಸಾದವನ್ನು ಸ್ವೀಕರಿಸಿದರು. ದಾನಿ ಮುಂಡ್ಕೂರು ರಾಮದಾಸ ಕಾಮತ್ ಸಹಿತ ಗಣ್ಯರಿಗೆ ಈ ಸಂದರ್ಭದಲ್ಲಿ ಪ್ರಸಾದ ನೀಡಲಾಯಿತು. ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಶಾಸಕ ಎನ್. ಯೋಗೀಶ್ ಭಟ್ ಸಹಿತ ಗಣ್ಯರು ಉಪಸ್ಥಿತರಿದ್ದರು.
ಮಹೋತ್ಸವದ ಅಂಗವಾಗಿ ಶ್ರೀದೇವರಿಗೆ ವಿಶೇಷ ಗಂಗಾಭಿಷೇಕ, ಪುಳಕಾಭಿಷೇಕ, ಸಹಸ್ರಧಾರಾ ಸೇವೆ ನಡೆದವು. ಸಂಜೆ ಮಹಾಯಜ್ಞ ಮಂಟಪದಲ್ಲಿ ಪೂರ್ಣಾಹುತಿ ನಡೆಯಿತು. ಮಹಾ ಸಮಾರಾಧನೆಯಲ್ಲಿ 50,000ಕ್ಕೂ ಅಧಿಕ ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು. ರಾತ್ರಿ ರಥೋತ್ಸವ ಕಾರ್ಯಕ್ರಮಗಳು ಜರಗಿದವು.
ಶ್ರೀಗಳ ಉಪಸ್ಥಿತಿ
ಕೊಡಿಯಾಲ್ ತೇರು ಸಂಭ್ರಮಕ್ಕೆ ಶ್ರೀ ಕಾಶೀಮಠಾಧೀಶ ಶ್ರೀಮತ್ ಸಂಯಮೀಂದ್ರತೀರ್ಥ ಸ್ವಾಮೀಜಿ ಅವರ ಉಪಸ್ಥಿತಿ ವಿಶೇಷ ಮೆರುಗು ನೀಡಿತ್ತು. ರಥಾರೂಢ ಶ್ರೀ ವೀರ ವೆಂಕಟೇಶ ದೇವರಿಗೆ ನೂತನವಾಗಿ ನಿರ್ಮಿಸ ಲಾದ ಸ್ವರ್ಣ ಪ್ರಭಾವಳಿ ಹಾಗೂ ಸ್ವರ್ಣ ಯಾಲಕ್ಕಿ ಮಾಲೆಯನ್ನು ಶ್ರೀಗಳು ಸಮರ್ಪಿಸಿದರು. ಶ್ರೀಪಾದರು ಬಳಿಕ ರಥವನ್ನು ಎಳೆಯುವ ಮೂಲಕ ಸೇವೆ ಸಲ್ಲಿಸಿದರು.