ವಿಟ್ಲ: ವಿರಕ್ತ, ತ್ಯಾಗ ಭಾವನೆ ಯಿದ್ದಾಗ ಮಾತ್ರ ಸವಾಲುಗಳನ್ನು ಎದುರಿ ಸಲು ಸಾಧ್ಯ. ದೇವರ ಶಕ್ತಿಯೆದುರು ನಾವೆಲ್ಲರೂ ತೃಣ ಸಮಾನರೆಂಬ ಸತ್ಯವನ್ನು ತಿಳಿದುಕೊಳ್ಳಬೇಕು. ಪ್ರೀತಿಯಿಂದ ಮಾತ್ರ ಸಮಾಜ, ಭವ್ಯ ದೇಶವನ್ನು ಕಟ್ಟಲು ಸಾಧ್ಯ ಎಂದು ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ತಿಳಿಸಿದರು.
ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ನಡೆಯುತ್ತಿರುವ ಒಂದು ಮಂಡಲ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.
ಮುಖ್ಯ ಅತಿಥಿಯಾಗಿದ್ದ ಮಂಚಿ ಧರ್ಮ ಜಾಗರಣ ಟ್ರಸ್ಟ್ ಅಧ್ಯಕ್ಷ ಕೈಯ್ಯೂರು ನಾರಾಯಣ ಭಟ್ ಮಾತ ನಾಡಿ, ಮಾಣಿಲ ಶ್ರೀಯವರು ಜನ ರೊಂದಿಗೆ ಬೆರೆತು ನೂರಾರು ಕ್ಷೇತ್ರಗಳ ಅಭಿವೃದ್ಧಿ, ಶೈಕ್ಷಣಿಕ – ಸಾಮಾಜಿಕ ಸೇವೆ ನಡೆಸುತ್ತಿದ್ದಾರೆ ಎಂದು ಶ್ಲಾಘಿಸಿದರು.
ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಮಹಿಳಾ ಸೇವಾ ಸಮಿತಿ ಅಧ್ಯಕ್ಷೆ ವನಿತಾ ವಿ. ಶೆಟ್ಟಿ, ಸ್ವಾಗತಿಸಿದರು. ಉಪಾಧ್ಯಕ್ಷೆ ಮೀನಾಕ್ಷಿ ವಂದಿಸಿದರು. ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಸೇವಾ ಪ್ರತಿಷ್ಠಾನದ ಟ್ರಸ್ಟಿ ಮಂಜು ವಿಟ್ಲ ನಿರೂಪಿಸಿದರು.
ಶ್ರೀಕ್ಷೇತ್ರದಲ್ಲಿ ರವಿವಾರ ಬೆಳಗ್ಗೆ ಗಣಪತಿ ಹವನ, ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ಶ್ರೀ ಗುರುಪೂಜೆ, ಬಾಲಭೋಜನ, ನಾಗದೇವರಿಗೆ ಕ್ಷೀರಾಭಿಷೇಕ, ಗೋಮಾತಾ ಪೂಜೆ, ಕನಕಧಾರಾ ಯಾಗ, ಸಾಮೂಹಿಕ ಕುಂಕುಮಾರ್ಚನೆ, ಪೂರ್ಣಾಹುತಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಸಂಜೆ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಶ್ರೀ ದುರ್ಗಾ ಪೂಜೆ, ಆಶ್ಲೇಷಾ ಬಲಿ, ಶ್ರೀ ವಿಠೊಭರುಕ್ಮಿಣಿ ಧ್ಯಾನ ಮಂದಿರದಲ್ಲಿ ಭಜನ ಸಂಕೀರ್ತನೆ, ಶ್ರೀ ಲಕ್ಷ್ಮೀ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.